Friday, 2 August 2013

ದೇವರು ಮೆಚ್ಚಿದ ಭಕ್ತ

ಟಿಪ್ಪಣಿ :

ಚಿಕ್ಕ ಮಕ್ಕಳ ನೀತಿ ಕಥೆ ಎನ್ನಿಸಬಹುದು, ಆದರೆ ದೇವರು ಎಂದರೆ ಇದೇ ಎಂದು ನಂಬಿರುವವನು ನಾನು. ಯಾರಾದರೂ ದೇವರನ್ನು ನಂಬುತ್ತೀಯಾ  ಎಂದು ಕೇಳಿದಾಗ ಹೌದು ಎನ್ನುವವನು ನಾನು. 'Do good, get Good' ಎನ್ನುವುದೇ ದೇವರ ಸೂತ್ರ ಎನ್ನುವುದು ನನ್ನ ಉದ್ದೇಶ ಅಷ್ಟೇ. ವೈಯಕ್ತಿಕವಾಗಿ ಅಕಾರಣವಾಗಿ ಇಷ್ಟ ಆದ ಕಥೆ.  ಇಲ್ಲಿಯವರೆಗೂ ಓದುವಷ್ಟು ತಾಳ್ಮೆ ಉಳಿದಿದ್ದರೆ ನಿಮ್ಮ ಅಭಿಪ್ರಾಯ ತಿಳಿಸಿ :)
------------------------------------------------------------------------------------------------------------
ಅದೊಂದು ಊರು, ಆ ಊರಿನಲ್ಲಿ ಒಂದು ದೇವಸ್ಥಾನ. ಆ ದೇವಸ್ಥಾನಕ್ಕೆ ಒಬ್ಬ ದೇವರು. ಎಲ್ಲಾ ಊರುಗಳ ಎಲ್ಲ ದೇವರುಗಳಂತೆ ಭಕ್ತಗಣಗಳಿಂದ ಸೇವೆ ಮಾಡಿಸಿಕೊಂಡು, ಹಣ್ಣು ಕಾಯಿಗಳನ್ನು ತನ್ನ ಹೆಸರಿನಲ್ಲಿ ಅರ್ಪಿಸಿ ಭ(ಭಂ)ಜಿಸುತ್ತಿರುವ ಜನಸಮೂಹವನ್ನು ಕಂಡು ಒಳಗೊಳಗೆ ನಗುತ್ತಿರುವ ಸರ್ವಜ್ಞ, ಸರ್ವಾಂತರ್ಯಾಮಿ, ಸರ್ವಶಕ್ತ ಆತ.

ಎಲ್ಲವೂ ಹೀಗೇ ಇರಲು, ಕಾಲಚಕ್ರ ಸುಮ್ಮನೇ ಉರುಳುತ್ತಿರಲು, ದೇವನಿಗೆ ಒಂದು ದಿನ ಜಗಜ್ಜನಿತವಾದ ತನ್ನ ಮಾಮೂಲು ಮೂಕ ಧಾಟಿಯನ್ನು ಮೀರಿ ತನ್ನೂರಿನ ಒಬ್ಬ ಶ್ರೀಸಾಮಾನ್ಯನ ಬಳಿ ಒಂದಿಷ್ಟು ಸಮಯ ಕಳೆಯುವ ಮನಸ್ಸು ಮೂಡಿತು. ಸಮಯ ಇದ್ದಿದ್ದರೆ ಎಲ್ಲ ಭಕ್ತರನ್ನೂ ಭೇಟಿಯಾಗಿ ಬಿದುತ್ತಿದ್ದನೇನೋ ಪರಮಾತ್ಮ, ಆದರೆ ಈ ಭೂಮಿಯ ಮತ್ತು ಈ ಭೂಮಿಯಂತದ್ದೇ ಅದೆಷ್ಟೋ ಲೋಕಗಳ ಸೃಷ್ಟಿ ಸ್ಥಿತಿ ಲಯಗಳ ಹೊಣೆಹೊತ್ತ ಪರಮಾತ್ಮನಿಗೆ ಅಷ್ಟೆಲ್ಲಾ ಸಮಯ ಸಿಕ್ಕಿತಾದರೂ ಹೇಗೆ? ಅದಕ್ಕೆ ಈಗಿನ ಕಾಲದ ಚುನಾವಣೆ ಕಾಲದ ಗಿರ್ಮಿಟ್ ನಂತಲ್ಲದೇ ನಿಜವಾಗಿ ಒಬ್ಬ ಸದ್ಭಕ್ತನನ್ನು ಭೇಟಿ ಮಾಡುವ ನೈಜಭಾವ ಮೂಡಿತ್ತು ಆಗಿನ ಕಾಲದ ಆ ದೇವರಿಗೆ. ಸರಿ, ಆಯ್ತು ಯಾರನ್ನು ಭೇಟಿ ಮಾಡೋದು ಎಂದು ತೀರ್ಮಾನಿಸಬೇಕಲ್ಲಾ? ಆ ದಿನ ರಾಂಡಮ್ ಆಗಿ ಆಯ್ಕೆ ಮಾಡಿದ ಒಂದು ಊರಿನ ಎಲ್ಲರ ಕನಸಿನೊಳಗೂ ದೇವರು ಬಂದಿದ್ದ. "ಮುಂದಿನ ಸೋಮವಾರ ನಿಮ್ಮ ಊರ ದೇವಸ್ಥಾನದಲ್ಲಿ ಪ್ರತ್ಯಕ್ಷನಾಗುತ್ತೇನೆ ನಾನು. ಅಂದು ನನಗೆ ಅತ್ಯುತ್ತಮ ಕಾಣಿಕೆಯನ್ನು ತರುವ ಒಬ್ಬ ಸದ್ಭಕ್ತನ ಜೊತೆ ಒಂದು ದಿನವನ್ನು ಕಳೆಯುತ್ತೇನೆ ನಾನು. (ಈ ಕಾಲದ ಲಿಮಿಟೆಡ್ ಆಫರ್ ಗಳನ್ನು ಹೇಳುತ್ತಾರಲ್ಲಾ ಆ ಧಾಟಿಯಲ್ಲಿ) ಆದ್ದರಿಂದ ಯೋಚಿಸಿ ನನಗೇನು ಇಷ್ಟವೋ ಅದನ್ನು ತೆಗೆದುಕೊಂಡು ಬನ್ನಿ " ಎಂದಷ್ಟೇ ಹೇಳಿ ಮತ್ತೆ ತನ್ನ ಅಗೋಚರ ಮೋಡ್ ಗೆ ಹೋದ ಪರಮಾತ್ಮ.

ಮಾರನೆಯ ದಿನ ಬೆಳಿಗ್ಗೆ ಎದ್ದ ಜನರೆಲ್ಲರಿಗೂ ನಿನ್ನೆ ಕಂಡದ್ದು ಕನಸೋ ನಿಜವೋ ಎಂಬ ಬಗ್ಗೆ ಭಯಂಕರ ಗೊಂದಲ. ಒಬ್ಬ ದೇವರನ್ನು ಶಂಕ್ರಚಕ್ರಧಾರಿಯನ್ನು ನೋಡಿದ್ದರೆ ಮತ್ತೊಬ್ಬ ಅದೇ ದೇವರನ್ನು ಬೂದಿ ಬಡಿದುಕೊಂಡ ಸ್ಮಶಾನವಾಸಿಯನ್ನು ನೋಡಿದ್ದ, ಒಬ್ಬನಿಗೆ ಶ್ವೇತಾಂಬರಿ ಸಾತ್ವಿಕ ಸರಸ್ವತಿಯಾಗಿ ಕಂಡರೆ, ಮತ್ತೊಬ್ಬಳಿಗೆ ರುಂಡಮಾಲಾಧಾರಿಯಾದ ದುರ್ಗೆಯಾಗಿ ಗೋಚರಿಸಿದ್ದಳು. ಏನೇ ಇರಲಿ, ಎಲ್ಲರಿಗೂ ದೇವರು ಕಂಡಿದ್ದ ಆ ರಾತ್ರಿಯಾ ಕನಸಿನಲ್ಲಿ. ಮಾರನೆಯ ಬೆಳಿಗ್ಗೆ ಎಲ್ಲರೂ ಇನ್ನೊಬ್ಬರ ಬಳಿ ವಿಚಾರಿಸಿದ್ದೇ ವಿಚಾರಿಸಿದ್ದು, ತಮ್ಮ ಅಪೂರ್ವ ಅನುಭವವನ್ನು ವಿವರಿಸಿದ್ದೆ ವಿವರಿಸಿದ್ದು. ಆದರೆ ಕಾಣಿಕೆಯ ವಿಷಯ ಉಳಿದವರಿಗೆ ತಿಳಿದು ಹೋದರೆ ಅವರು ನಮಗಿಂತ ಅಮೂಲ್ಯವಾದದ್ದನ್ನು ತಂದು ದೇವರ ಜೊತೆ ಒಂದು ದಿನ ಕಾಲಕಳೆಯುವ ಅವಕಾಶವನ್ನು ಕಸಿದುಕೊಂಡುಬಿಡುತ್ತಾರೋ ಎಂಬ ಹೆದರಿಕೆಯಿಂದ ಯಾರೂ ತಮಗೆ ಕಾಣಿಸಿಕೊಂಡ ದೇವರ ಅತ್ಯುತ್ತಮ ಕಾಣಿಕೆಯ ಬೇಡಿಕೆಯನ್ನು ಪ್ರಸ್ತಾಪಿಸಲಿಲ್ಲ. ಲಕ್ಷ್ಮೀಪತಿ ಎಂಬ ಬಡರೈತನನ್ನು ಬಿಟ್ಟರೆ. ತನಗೆ ಕಂಡ  ದೇವರ ಬೇಡಿಕೆಯನ್ನು ನೆರೆಹೊರೆಯವರ ಹತ್ತಿರ ಹೇಳಿದಾಗ ಅವನಿಗೆ ಸಿಕ್ಕಿದ್ದು ನಿರೀಕ್ಷಿತ ಅಪಹಾಸ್ಯ ಮಾತ್ರ, "ಊರಲ್ಲಿ ಮತ್ಯಾರಲ್ಲೂ ಏನನ್ನೂ ಕೇಳದ ದೇವರು ಕಡುಬಡವರಲ್ಲಿ ಅತಿಬಡವನಾದ ನಿನ್ನನ್ನು ಕೇಳಿದ್ದಾನೆ ಎಂದರೆ ಅದೇ ದೇವರ ಮಾಯೆ " ಎಂದು ಒಬ್ಬ ಹೇಳಿದರೆ "ಎಷ್ಟಂದರೂ ಲಕ್ಷ್ಮೀಪತಿಯಲ್ಲವೇ ಈತ, ಅದಕ್ಕೆ ಕೇಳಿರಬೇಕು" ಎಂದು ಗೊಳ್ಳನೇ ನಕ್ಕ ಇನ್ನೊಬ್ಬ. ಎಲ್ಲರೂ ತಾವು ಈ ಲಕ್ಷ್ಮೀಪತಿಗಿಂತ ಉತ್ತಮ ಕಾಣಿಕೆ ತೆಗೆದುಕೊಂಡುಹೋದರೆ ಸಾಕು ಎಂಬ ಸಮಾಧಾನಕ್ಕೆ ಬಂದಿದ್ದರು. ಆದರೆ ಲಕ್ಷ್ಮೀಪತಿ ಯಾರ ಬಳಿಯೂ ದೇವರು ಏನನ್ನೂ ಕೇಳದೆ ಇದ್ದುದರಿಂದ ತನ್ನ ಬಳಿ ಕೇಳಿದ್ದು ತನ್ನ ಒಂದು ಭ್ರಮೆಯಷ್ಟೇ ಎಂದು ಭಾವಿಸಿ ಸೋಮವಾರ ಕೈ ಬೀಸಿಕೊಂಡು ಹೋಗುವುದೆಂದು ನಿರ್ಧರಿಸಿದ್ದ.

ಎಲ್ಲರೂ ಕಾತರಿಸಿ ಕಾಯುತ್ತಿದ್ದ ಸೋಮವಾರ ಬಂತು. ಮುಂಜಾನೆಯ ಮೊದಲ ಸೂರ್ಯಕಿರಣ ಬೀಳುವುದರ ಒಳಗೆ ಊರಿಗೆ ಊರೇ ದೇವಸ್ಥಾನದ ಎದುರು ಪ್ರತ್ಯಕ್ಷವಾಗಿತ್ತು. ಊರ ಜಮೀನ್ದಾರ ತನ್ನ ಹದಿನೈದು ಎಕರೆಯ ಭೂಮಿಯ ಪತ್ರವನ್ನು ತೆಗೆದುಕೊಂಡು ಬಂದಿದ್ದರೆ, ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಪೂಜಾರಿ ಅರ್ಧ ಕೆ. ಜಿ. ಆಗುವಷ್ಟು ಚಿನ್ನದ ಆಭರಣಗಳನ್ನು ತಂದಿದ್ದ, ಶ್ರೀಮಂತ ರೈತನೊಬ್ಬ ಐದು ಗಾಡಿಯಷ್ಟು ಧವಸವನ್ನು ತಂದರೆ ಬಡ ಕೂಲಿಯವನೊಬ್ಬ ತನ್ನ ಮಗಳ ಮದುವೆಗೆಂದು ತೆಗೆದಿಟ್ಟಿದ್ದ ಎಲ್ಲ ದುಡ್ಡನ್ನೂ ತಂದಿದ್ದ. ಆದರೆ ಲಕ್ಷ್ಮೀಪತಿ? ಪಾಪ ಏನಾದರೂ ತರಬೇಕೆಂಬ ಯಾವ ಜ್ಞಾನವೂ ಇಲ್ಲದೆ ಸುಮ್ಮನೆ ಕೈ ಬೀಸಿಕೊಂಡು ಬಂದಿದ್ದ. ದೇವಸ್ಥಾನದ ಪ್ರಾಂಗಣಕ್ಕೆ ಬಂದು ನೋಡುತ್ತಾನೆ, ಎಲ್ಲರೂ ಬಗೆಬಗೆಯ ಕಾಣಿಕೆಗಳೊಂದಿಗೆ ಬಂದಿದ್ದಾರೆ.  ಒಬ್ಬರನ್ನೊಬ್ಬರು ನೂಕಿಕೊಂಡು ದೇವಸ್ಥಾನದ ನೂರೆಂಟು ಮೆಟ್ಟಿಲುಗಳನ್ನು ಹತ್ತುತ್ತಿದ್ದಾರೆ. ತಾನೊಬ್ಬನೇ ಬರಿಕೈ ಸರದಾರ. ಆಯ್ತು ಹಾಗಿದ್ದರೆ, ದೇವರು ಕಾಣಿಸಿಕೊಳ್ಳುವುದರ ಒಳಗೆ ಮನೆಗೆ ಹೋಗಿ ಮುಂದಿನ ವಾರಕ್ಕೆಂದು ಇಟ್ಟಿದ್ದ ಸ್ವಲ್ಪ ರಾಗಿಯನ್ನಾದರೂ ತರೋಣ ಎಂದು ಭಾವಿಸಿ ಹತ್ತಿದ್ದ ಹತ್ತು ಮೆಟ್ಟಿಲುಗಳನ್ನು ಇಳಿದು ಮನೆಯ ಕಡೆ ಹೊರಡುತ್ತಾನೆ.

ಇತ್ತ ಕಡೆ ದೇವಸ್ಥಾನದ ಗರ್ಭಗುಡಿಯಲ್ಲೋ ಜನರ ಹಾಹಾಕಾರ. ಎಲ್ಲರೂ ದೇವರ ಬಗ್ಗೆ ದೇವರ ಕನಸ್ಸಿನ ಬಗ್ಗೆ ಮಾತನಾಡುವವರೇ , ತಾವು ತಂದಿದ್ದನ್ನು ಅಡಗಿಸಿಟ್ಟು ಇನ್ನೊಬ್ಬರು ಎಷ್ಟು ಸುಳ್ಳು ಹೇಳಿದರು, ಏನನ್ನೂ ತರುವುದಿಲ್ಲ ಎಂದು ಏನೇನನ್ನೆಲ್ಲ ತಂದರು ಎಂದು ಅಣಕಿಸುವವರೇ. ದೇವರು ಅವತರಿಸಿದರೆ ನಮ್ಮ ಸತ್ಯವನ್ನು ಮಾತ್ರ ಅದು ಹೇಗೋ ನಂಬಿ ಉಳಿದವರದನ್ನು ತಿರಸ್ಕರಿಸುತ್ತಾನೆ ಎಂದು ದೇವರಂತಹ ದೇವರ ಕಣ್ಣಿಗೇ ಮಣ್ಣು ಹಾಕಲು ನೋಡುವವರೇ ! ಹೀಗೆಯೇ ಜನ ಗುಜುಗುಡುತ್ತಿರಲು, ತನಗೆ ದೇವರು ಕಾಣಲಿ ಎಂಬುದಕ್ಕಿಂತ ತನಗೊಬ್ಬನಿಗೆ ಮಾತ್ರ ದೇವರು ಕಾಣಲಿ ಎಂದು ಹಂಬಲಿಸುತ್ತಿರಲು ದೇವರು ಪ್ರತ್ಯಕ್ಷನಾಗಿದ್ದ ದಿವ್ಯ ಬೆಳಕಿನ ಹಿನ್ನೆಲೆಯಲ್ಲಿ. ಆದರೆ ಅದಕ್ಕಿಂತ ದೊಡ್ಡ ಆಶ್ಚರ್ಯ ಆಗಿದ್ದು ಅವನ ಪಕ್ಕದಲ್ಲಿ ನಿಂತಿದ್ದ ಲಕ್ಷ್ಮಿಪತಿಯನ್ನು ನೋಡಿ.

ಜನ ಆಶ್ಚರ್ಯದಿಂದ ಬಾಯಿ ತೆಗೆದವರು ಬಾಯ್ ಮುಚ್ಚಿರಲಿಲ್ಲ, ದೇವರು ಮಾತನಾಡತೊಡಗಿದ್ದ "ಭಕ್ತರೇ, ನಿಮಗೆಲ್ಲ ನನ್ನ ಪರಿಚಯ ಮರೆತು ಹೋಗಿರಬೇಕು ಹೋಗಿರಬೇಕು ಅಲ್ವಾ? ಯಾರಿಗೂ ನನ್ನ ಪರಿಚಯ ಸಿಗಲಿಲ್ಲ ನಾನು ದೇವಸ್ಥಾನದ ಹೊರಕ್ಕೆ ಕುಳಿತಿದ್ದರೂ ನೀವಾರೂ ನನ್ನನ್ನು ಗುರುತಿಸಲಿಲ್ಲ. ಅಂದು ನಾನು ನಿಮ್ಮ ಕನಸಿನಲ್ಲಿ ಬಂದಾಗ ಏನೆಂದು ಹೇಳಿದ್ದೆ? ನಿಮ್ಮ ಬಳಿಯಲ್ಲಿರುವ ಅತಿ ಅಮೂಲ್ಯವಾದದ್ದನ್ನು ತೆಗೆದುಕೊಂಡು ಬನ್ನಿ ಎಂದು. ನೀವು ಮಾಡಿದ್ದಾದರೂ ಏನು, ಚಿನ್ನವನ್ನು, ನಗನಾಣ್ಯವನ್ನು, ಧವಸಧಾನ್ಯ್ಗಳನ್ನು ತಂದು ಸುರಿದಿರಿ ನನ್ನ ಮುಂದೆ. ಏಳು ಜಗದ ಒಡೆಯನಾದ ನನಗೇ ಸಂಪತ್ತಿನ ಅವಶ್ಯಕತೆ ಬಂತು ಎಂದುಕೊಂಡಿರೋ ನೀವು? ಹುಚ್ಚಪ್ಪಗಳಿರಾ, ನೀವೇ ನಿಮ್ಮಲ್ಲಿಯೇ ಒಮ್ಮೆ ನನ್ನಲ್ಲಿರುವ ಅತ್ಯಮೂಲ್ಯ ವಸ್ತು ಯಾವುದೆಂದು ಕೇಳಿಕೊಂಡಿದ್ದರೆ ನನ್ನ ಮುಖ ಪರಿಚಯವಾದರೂ ಆಗುತ್ತಿತ್ತು. ನಾನು ನಿಮ್ಮ ಮನಸ್ಸಿನಲ್ಲಿಯೇ ಇದ್ದೆ ಅಮೂರ್ತವಾಗಿ. ಮೌಲ್ಯ ಕಟ್ಟಲಾಗದ ನಿಮ್ಮ ಸುಂದರ ಮನಸ್ಸನ್ನು ಮತ್ತಷ್ಟು ನಿರ್ಮಲಗೊಳಿಸಿಕೊಂಡು ತೆಗೆದುಕೊಂಡು ಬನ್ನಿ ಎಂದು ಬಿಡಿಸಿ ಹೇಳದೇ ಇದ್ದದ್ದು ನನ್ನ ತಪ್ಪೇ?  "

ದೇವರು ಹೀಗೆ ಲೆಕ್ಚರ್ ಕೊಡ್ತಾ ಕೂರ್ತಿದ್ನೇನೋ ಅಷ್ಟ ಹೊತ್ತಿಗೆ ಜಮೀನ್ದಾರ ಮಧ್ಯೆ ಬಾಯಿ ಹಾಕಿದ್ದ "ಅದೆಲ್ಲಾ ಸರಿ, ನಮಗೆ ಪರಿಚಯ ಸಿಗ್ಲಿಲ್ಲ ಅಂತ ನೀನು ಹೇಳಿದ್ರೆ ಒಪ್ಕೊಳೋಣ, ಯಾರ್ಗೂ ಗೊತ್ತಾಗ್ಲಿಲ್ಲ, ಆದ್ರೆ ಎಲ್ಲ ಬಿಟ್ಟು ಈ ಲಕ್ಷ್ಮಿಪತಿನಾ ಏನಕ್ಕೆ ನಿನ್ನ ಪಕ್ಕದಲ್ಲಿ ಕೂರಿಸಿಕೊಂಡಿದೀಯಾ?"  ಜಗದೊಡೆಯನಿಗೆ ಸವಾಲ್ ಹಾಕಿದ್ದ ಊರ ಒಡೆಯ.

ದೇವರು ನಕ್ಕುಬಿಟ್ಟ, ಜಮೀನ್ದಾರನಿಗೆ ನಾನ್ಯಾಕೆ ಈ ಪ್ರಶ್ನೆ ಕೇಳಿದೆನೊ ಎಂದು  ಎನ್ನಿಸುವ ಹಾಗೆ. ದೇವರಿಗೂ ಇಷ್ಟು ವ್ಯಂಗ್ಯ ಬರುತ್ತದೆಯೇ ಎಂದು ಜನರು ತಲೆಕೆಡಿಸಿಕೊಂಡಿರಬೇಕಾದರೆ ನಗುವನ್ನು ನಿಲ್ಲಿಸಿ ಮತ್ತೆ ಮಾತನಾಡತೊಡಗಿದ ಪರಮಾತ್ಮ.
"ಈಗಲೂ ಬಿಟ್ಟಿಲ್ಲ ನೋಡಿ ನಿಮ್ಮ ಚಾಳಿ, ನಾನು ನಿಮ್ಮನ್ನು ಯಾಕೆ ಆಯ್ದುಕೊಳ್ಳಲಿಲ್ಲ  ಎಂಬ ಬಗ್ಗೆ ಅಂತರ್ಮಥನ ಮಾಡಿಕೊಳ್ಳುವುದನ್ನು ಬಿಟ್ಟು ಅವನನ್ನು ಏಕೆ ಆಯ್ದುಕೊಂಡೆ ಎಂಬ ಅಸೂಯಾಭಾವವೇ ನಿಮಗೆ ಮುಖ್ಯವಾಗಿಬಿಟ್ಟಿದೆ. ನಿಮ್ಮ ಶ್ರೇಯಸ್ಸಿಗೆ ನಿಮಗೆ ಹಕ್ಕಿದೆಯೇ ಹೊರತು ಇನ್ನೊಬ್ಬನ ಅವನತಿಗಲ್ಲ ಅಲ್ಲವೇ? ಇರಲಿ ಬಿಡಿ ನಿಮಗೆ ಅರ್ಥವಾಗದೇನೂ ಇರಬಹುದು ನನ್ನ ಮಾತು, ಹಾಗಾದ ಪಕ್ಷದಲ್ಲಿ ನೀವು ಬೇರೆಯೇ ಅರ್ಥವನ್ನೂ ಕಲ್ಪಿಸಿ ಅದು ನನ್ನದೇ ಮಾತೆಂದು ನನಗೇ  ನಂಬಿಸಬಹುದು, ಏನೇ ಇರಲಿ ಯಾಕೆ ಲಕ್ಷ್ಮೀಪತಿಯನ್ನು ಮೆಚ್ಚಿದೆ ಎಂಬುದಕ್ಕೆ ಅವನ ಬಡತನದ ಮಧ್ಯೆಯೂ ಒಂದು ಹಿಡಿ ರಾಗಿ ತಂದ ಎಂಬುದೇ ಕಾರಣ ಅಲ್ಲ. ಅದೂ ಒಂದಿರಬಹುದು ಅಷ್ಟೇ. ನೀವೆಲ್ಲ ನಿಮ್ಮ ನಿಮ್ಮೊಳಗಣ ಸುಳ್ಳನ್ನು ಸತ್ಯ ಎಂದು ಬಿಂಬಿಸುವ ಪ್ರಯತ್ನದಲ್ಲಿ ಅವನ ಬಳಿ ನಾನು ಏನನ್ನೂ ತರಲು ಹೇಳಿಲ್ಲ ಎಂದು ಹಾಸ್ಯವಾಡಿದಿರಲ್ಲ, ಪಾಪ ಮುಗ್ಧ ಲಕ್ಷ್ಮಿಪತಿ ನಂಬಿದ್ದ ಅದನ್ನು. ಹಾಗೆಂದೇ ಕೈ ಬೀಸಿಕೊಂಡು ಬಂದಿದ್ದ, ಆದರೆ ನಿಮ್ಮ ಕಾಣಿಕೆಗಳನ್ನು ನೋಡಿ ಗಾಬರಿ ಬಿದ್ದ ಆತ ಬೇಗನೇ ಮನೆಗೆ ಹೋಗಿ ಮುಂದಿನ ವಾರಕ್ಕೆಂದು ಇಟ್ಟಿದ್ದ ಒಂದು ಹಿಡಿ ರಾಗಿಯನ್ನು ತರಲು ಯೋಚಿಸುತ್ತಾನೆ ಅದೇ ಕಾರಣಕ್ಕೆ ಹೊರಡುತ್ತಾನೆ ಕೂಡ. ಆದರೆ ಅಷ್ಟು ಹೊತ್ತಿಗೆ ಅವನ ಕಣ್ಣಿಗೆ  ಅಲ್ಲಿಯೇ ಮೆಟ್ಟಿಲುಗಳ ಬುಡದಲ್ಲಿ ಕುಳಿತಿದ್ದ ಒಬ್ಬ ಕುಂಟನು ಕಾಣುತ್ತಾನೆ, ನಾನೇ ಆ ಕುಂಟ. ನೀವೆಲ್ಲರೂ ಮೆಟ್ಟಿಲುಗಳನ್ನು ಹತ್ತಿ ಓಡುವಾಗ ನಿಮ್ಮೆಲ್ಲರಲ್ಲಿ ಕೇಳಿಕೊಂಡ ಹಾಗೆ ಅವನ ಬಳಿಯೂ ದಯವಿಟ್ಟು ನನಗೆ ಮೆಟ್ಟಿಲುಗಳನ್ನು ಹತ್ತಲು ಸಹಾಯ ಮಾಡುವಂತೆ ಕೇಳಿದೆ. ನಾನು ತಂದಿರುವ ಕಾಣಿಕೆಯಲ್ಲಿ ಅರ್ಧ ಭಾಗ ಕೊಡುವ ಆಸೆಯನ್ನೂ ತೊರಿಸಿದೆ. ಎರಡು ಸೆಕೆಂಡುಗಳಷ್ಟು ಯೋಚಿಸಿದ ಆತ, "ಕಾಣಿಕೆಯನ್ನು ತರಲು ಹೋಗಲೇ ಅಥವಾ ಈ ಕುಂಟನಿಗೆ ಸಹಾಯ ಮಾಡಲೇ" ಎಂದು , ಕೇವಲ ಎರಡೇ ಸೆಕೆಂಡುಗಳು. "ಅಯ್ಯಾ, ನೀನು ನನಗೆ ಅರ್ಧ ಭಾಗವನ್ನು ಕೊಡುವುದು ಬೇಡ ದೇವಸ್ಥಾನದ ಮೆಟ್ಟಿಲುಗಳನ್ನು ನಾನು ಹತ್ತಿಸುತ್ತೇನೆ. ದೇವರಿಗೆ ಕೊಡಲು ನಾನು ಕಾಣಿಕೆ ತರಬೇಕಿದೆ ಮನೆಗೆ ಹೋಗಿ. ನಾನು ಬರುವುದರೊಳಗೆ ದೇವರು ಪ್ರತ್ಯಕ್ಷನಾದರೆ ಏನು ಮಾಡುವುದು? ನನ್ನನ್ನೇ ಆರಿಸಿಕೊಳ್ಳಲಿ ಎಂದು ಬಯಸುವುದು ಬಹಳೇ ಮಹಾತ್ವಾಕಾಂಕ್ಷೆಯಾದೀತಾದರೂ ಒಮ್ಮೆ ಆತನ ಮುಖವನ್ನು ನೋಡಬೇಕೆಂಬ ಆಸೆಯಿದೆ. ಇರಲಿ ಬಿಡು, ನಿನ್ನನ್ನು ಮೇಲೆ ಹರಿಸಿ ದೇವಸ್ಥಾನದ ಮುಖ್ಯಗಂಟೆಯ ಬಳಿ ಕೂರಿಸಿ ಹೋಗುತ್ತೇನೆ. ದೇವರು ಪ್ರತ್ಯಕ್ಷನಾಗುವ ಹಾಗೆ ಕಂಡುಬಂದರೆ ಮೂರು ಸಲ ಗಂಟೆ ಬಾರಿಸುತ್ತೀಯಾ? ನಾನು ಮನೆಗೆ ಹೋಗುವ ದಾರಿಯಲ್ಲಿದ್ದರೆ ತಿರುಗಿ ಬರುತ್ತೇನೆ . ಅಷ್ಟನ್ನು ಮಾಡುವೆಯಾ ಗೆಳೆಯಾ? ದಯವಿಟ್ಟು ಉಳಿದವರ ಹಾಗೆ ಮೋಸ ಮಾಡಬೇಡ" ಎಂದ. ಇಂತಹ ಮುಗ್ಧನೆದುರು ನನಗೇ ಆ ಕುಂಟನ ಅವತಾರದಲ್ಲಿ ಕೂರುವುದು ಕಷ್ಟವಾಯಿತು, ನೀವು ಜನಗಳು ಹೇಗಾದರೂ ಇರುತ್ತೀರೆನೋ."

ಜನರು ಮುಂದಿನ ವಾದಕ್ಕೆ ಅಣಿಯಾಗುವುದರೊಳಗೆ ದೇವರು ಅಂತರ್ಧಾನನಾಗಿದ್ದ ಲಕ್ಷ್ಮೀಪತಿಯ ಜೊತೆಗೆ.  


ಇದು ಈ ವಾರದ ಪಂಜುವಿನಲ್ಲಿ ಪ್ರಕಟವಾಗಿತ್ತು ದೇವರು ಮೆಚ್ಚಿದ ಭಕ್ತ.  

Monday, 24 June 2013

ಅಪ್ಪ

ಹತ್ತು ದಿನದ ಕೆಳಗೆ ಅಪ್ಪಂದಿರ ದಿನವಿತ್ತು ಎಂದು ಎಲ್ಲಾ ಬ್ಲಾಗಿಗರು ಬ್ಲಾಗನ್ನು ಪೋಸ್ಟ್ ಮಾಡಿದಾಗಲೇ ತಿಳಿದದ್ದು ನನಗೆ. ಅಷ್ಟರ ಮಟ್ಟಿಗೆ ಮರೆತಿದ್ದೇನೆ ಅಪ್ಪನನ್ನು? ಸಾಧ್ಯವೇ ಇಲ್ಲ. ಅಕ್ಷರಶಃ ಪ್ರತಸ್ಮರಣೀಯರಾದ ಅಪ್ಪನನ್ನು ಹಾಗೆ ಮರೆಯಲಾದೀತೇ? ಅಪ್ಪನ ದಿನ ಮಾತ್ರ ಮರೆತು ಹೋಗಿತ್ತು ಅಷ್ಟೇ. ಯಾಕೋ ಏನೋ ಬರೆಯಬೇಕೆಂಬ ಮೂಡು ಬಂದು ಕೂತು ಬಿಟ್ಟಿತ್ತು ತಲೆಯಲ್ಲಿ. ಮೊದಲೇ ಅಪ್ಪನ ಬಗ್ಗೆ ಎರಡು ಬಾರಿ ಬರೆದಿದ್ದೆನಾದರೂ ಬರೆಯಲು ಬೇಕಾದಷ್ಟು ವಿಷಯಗಳಿದ್ದವು ಬಿದಿದ್ ಅಪ್ಪನ ಬಗ್ಗೆ. ಹಾಗೆ ಹುಟ್ಟಿದ್ದು ಈ ಗದ್ಯದಂತಹ ಪದ್ಯ. ಗದ್ಯವೇ ಇದು? ಅಲ್ಲ ಎನಿಸುತ್ತದೆ . ಪದ್ಯವೇ ಇದು? ಮೊದಲೇ ಅಲ್ಲ. ಸ್ವಲ್ಪ ಶಿಸ್ತಿನ ಹಿಡಿತಕ್ಕೊಳಪಡಿಸಿದ ಭಾವಗಳು ಅಷ್ಟೇ ಇವು, ಗದ್ಯಪದ್ಯವೆಂಬ ಭೇಧವಿಲ್ಲದೆ. 

ಅಪ್ಪಾ ನೆನಪಿದೆಯೇ ನಿನಗೆ ,
ದವಾಖಾನೆಯ ವಾಸನೆಯ ನಡುವೆ ಮೊದಲ ಬಾರಿ ಮುತ್ತು ಸುರಿದಂತೆ ನಾನತ್ತಿದ್ದು;
ಕಿಟಕಿಯ ಪಕ್ಕದ ಹಾಸಿಗೆಯ ಗಡಿಯಲ್ಲಿ ಅಂಗಾತದಿಂದ ನಾನು ಮಗ್ಗುಲು ಬದಲಿಸಿದ್ದು;
ಜಾತ್ರೆಯ ಮನೆಯ ಗದ್ದಲದ ಅಂಗಳದಲ್ಲಿ ಅಳುಕುತ್ತಾ ನಾ ಮೊದಲ ಹೆಜ್ಜೆ ಹಾಕಿದ್ದು* ;
ಅಜ್ಜನ ಮನೆಯ ಚಾವಡಿಯಲ್ಲಿ ಮಲಗಿಸಿ, ಪೂರ್ತಿ ಮಳೆಗಾಲಕ್ಕೊಂದು ಬಾಯ್ ಹೇಳಿದ್ದು**.
ಹೋಗಲಿ ಬಿಡು, ನೆನಪಿರಲಿಕ್ಕಿಲ್ಲ ನಿನಗೆ; ಹೇಗಾದರೂ ನೆನಪಿದ್ದೀತು ಈ ಚಿಲ್ಲರೆ ಘಟನೆಗಳು,
ನನ್ನ ನಾಳೆಗಳಿಗಾಗಿ ನಿನ್ನ ವರ್ತಮಾನವ ಅರ್ಪಿಸುವ ನಿನ್ನ ಬಿಡುವಿಲ್ಲದ ಚಟದ ಮಧ್ಯೆ. ॥೧॥


ಅಪ್ಪಾ ಗಮನಿಸಿದ್ದೆಯೇ ನೀನು,
ಕೂಸುಮರಿಯಾಗಿ ನಿನ್ನ ಬೆನ್ನು ಹತ್ತಲೆಂದೇ ಎಷ್ಟೋ ಸಲ ನಾ ಊಟ ಬೇಡವೆಂದಿದ್ದು;
ಕೋಪದ ಕೆಂಪುಕಣ್ಣಿಗೆ ಹೆದರಿ ಬೇಡವೆಂದಾಗಲೂ ಮುದುರಿ ಊಟಕ್ಕೆ ಬಂದು ಕೂತಿದ್ದು
ಶಾಲೆಯ ಮೊದಲ ದಿನ ಹುಡುಗು ಬುದ್ದಿಗೆ ನೀ ಬಾರಿಸಿದಾಗಲೂ ನಾ ಹಲ್ಲು ಕಚ್ಚಿ ನಿಂತಿದ್ದು;
ಊರಿಡೀ ನನ್ನ ಹೊಗಳಿದಾಗಲೂ ನಿನ್ನೊಂದು ನಗೆಯ ಕೊಡುಗೆಗಾಗಿ ನಾನು ಹಂಬಲಿಸಿದ್ದು;
ಇರಲಿಕ್ಕಿಲ್ಲ ಬಿಡು, ಗೊತ್ತಿರಲಿಕ್ಕಿಲ್ಲ ನಿನಗೆ; ನನ್ನ ಈ ಸಣ್ಣ ಕೋರಿಕೆಗಳು ಕನವರಿಕೆಗಳು ;
ಮಗನೆಂಬ ಕನಸನ್ನು ಹಗಲು ರಾತ್ರಿಯೆಂದೆಣಿಸದೆ ಕಂಡ ನಿನ್ನ ಹುಚ್ಚುತನದ ಮಧ್ಯೆ ॥೨॥

ಅಪ್ಪಾ ಗೊತ್ತಿದೆಯೇ ನಿನಗೆ ,
ನೀ ಹೇಳಿದ ಎಲ್ಲ ಆದರ್ಶಪುರುಶರ ಕಥೆಗಳಿಗಿಂತ ನನಗೆ ನಿನ್ನ ಕಥೆಯೇ ಸ್ಪೂರ್ತಿಯಾಗಿದ್ದು;
ನಿನಗೇ ತಿಳಿಯದ ಹಾಗೆ ನಿನ್ನ ಬದುಕ ಕಟ್ಟಿಕೊಂಡಿದ್ದಲ್ಲದೇ ನಮ್ಮ ಬದುಕನೂ ಕಟ್ಟಿಕೊಟ್ಟಿದ್ದು;
ಅಪ್ಪನ ಕಂಡ ನೆನಪಿಲ್ಲದ ನೀನು ನನ್ನ ಮಟ್ಟಿಗೆ ಜಗತ್ತಿನ  ಅತಿ ಆದರ್ಶ ಅಪ್ಪನಾಗಿರುವುದು;
ಒರಟುತನದಲ್ಲಿ ಮುಚ್ಚಿಟ್ಟಷ್ಟೂ ನಿನ್ನ ಪ್ರೀತಿ ; ಹೃದಯಕ್ಕೆ ವ್ಯಕ್ತವಾದದ್ದು ಮತ್ತೆ ಹತ್ತಿರವಾದದ್ದು;
ಯಾವುದರ ಬಗೆಗಾದರೂ ಕಲ್ಪನೆಯಿತ್ತೇ ನಿನಗೆ; ಬಂದೇ ಇರಲಿಕ್ಕಿಲ್ಲ ಬಿಡು ಈ ಆಲೊಚನೆಗಳು;
ಗೊತ್ತಾಗಿ ನಿನಗಾದರೂ ಏನಾಗಬೇಕಿದೆ ನನ್ನ ಭವಿಷ್ಯದ ನಿನ್ನದೇ ಯೋಚನೆಗಳ ಮಧ್ಯೆ ॥೩॥

ಟಿಪ್ಪಣಿಗಳು:

*ನಾನು  ನಡಿಗೆ ಕಲಿತದ್ದು ಅತಿ ತಡವಾಗಿ. ಅಜ್ಜನ ಮನೆಯಿದ್ದ ಊರಲ್ಲಿ ಜಾತ್ರೆಯಿದ್ದಾಗ, ಪೌರೋಹಿತ್ಯದ ಮನೆಯ ಗಡಿಬಿಡಿಅಲ್ಲಿ ಎಲ್ಲ ಓಡಾಡುತ್ತಿದ್ದಾಗ ಯಾರಿಗೂ ಕಾಣದಂತೆ ಚಪ್ಪರಕ್ಕೆ ಕಟ್ಟಿದ್ದ ಕಂಬಗಳ ಮಧ್ಯೆ ನದೆದಿದ್ದೆನಂತೆ ನಾನು.

** ಅಪ್ಪ ಅಮ್ಮ ಇಬ್ಬರೂ ಶಿಕ್ಷಕರಿದ್ದುದರಿಂದ, ಶಿರಸಿಯಂತ ಶಿರಸಿಯೆಂಬ ಮಲೆನಾಡಿನಲ್ಲಿ  ನನ್ನನ್ನು ಶಾಲೆಗೇ ಕರೆದುಕೊಂಡು ಹೋಗುವುದು ಇಬ್ಬರಿಗೂ ಅಸಾಧ್ಯಾವಿದ್ದುದರಿಂದ ನನ್ನನ್ನು ಕಡಲತಡಿಯ ಕುಂದಾಪುರದಲ್ಲಿ ಅಜ್ಜನ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು ಮೇ ತಿಂಗಳ ಕೊನೆಯಲ್ಲಿ ಒಂದು ದಿನ ನನ್ನನ್ನು ಮಲಗಿಸಿ ಬರುವಾಗ ದೊಡ್ಡ ಮಾವಿನ ಹಣ್ಣನ್ನು ತರುತ್ತೇವೆ ಎಂದು ಹೇಳಿ  ಹೋಗುತ್ತಿದ್ದ ಅಪ್ಪನನ್ನು ಮತ್ತೆ ನೋಡುತ್ತಿದ್ದುದು ನಾನು ಅಕ್ಟೊಬರ್ ರಜೆಯಲ್ಲಿಯೇ.


Monday, 10 June 2013

ಯಾವುದು ತಪ್ಪು? ಯಾವುದು ಸರಿ?



       'ವೈತರಣಿ' ಆದ ಮೇಲೆ ಬರೆದ ಮೊದಲ ಕಥೆ. ಯಾಕೋ ಮತ್ತಾವ ಕಥೆಯನ್ನು ಬರೆಯಬಾರದು ಎಂದು ಅನಿಸಿತ್ತು ಎಂದು ಹೇಳಿದರೆ ಸುಳ್ಳೆಂದು ನಿಮಗೆ ಅನ್ನಿಸಬಹುದೇನೋ ಆದರೆ ಸತ್ಯದ ಮಾತದು. ಇರಲಿ, ಹಳೆಯದನ್ನು ಮರೆತು (??) ಹೊಸ ಕಥೆಯನ್ನು ಓದಿಕೊಳ್ಳಿ,  ಇಷ್ಟೇ ಸಾಕು ಪೀಠಿಕೆ.  

೧೯೮೬, ಮೈಸೂರು:
          ಮುಂಜಾನೆಯ ಎಳೆಬಿಸಿಲಿನಲ್ಲಿ ಮಳೆ ಬಿದ್ದಂತಿತ್ತು ರಾಯರ ಮನೆಯ ವಾತಾವರಣಸಂತಸ, ಸಂಭ್ರಮಬೆರೆತ ಹವೆಯಲ್ಲಿ ಕಂಡೂ ಕಾಣದಂತೆ ಬಂದುಕೂತಿತ್ತು ಅಗಲಿಕೆಯ ಬೇಸರ. ಇಂಜಿನಿಯರಿಂಗ್ ಕಲಿಯಲು ಕಾಣದ ಬಾಂಬೆ ಐ. . ಟಿ.ಗೆ ಹೋಗುತ್ತಿರುವ ಮಗನನ್ನು ಕಳಿಸಿಕೊಡಲು ರಾವ್ ದಂಪತಿಗಳು ಪ್ರಜ್ಞಾಪೂರ್ವಕವಾಗಿ ಬೆಳೆಸಿಕೊಂಡ ಸಡಗರದೊಂದಿಗೆ, ಒಬ್ಬನೇ ಮಗ ತಮ್ಮನ್ನು ಬಿಟ್ಟು ಹೋಗುತ್ತಿದ್ದಾನಲ್ಲಾ ಎಂಬ ದುಃಖದ ಸೆಳವಿತ್ತುಅತ್ತು ಸುಧಾರಿಸಿಕೊಂಡರು ಅಮ್ಮ ಅಲಮೇಲಮ್ಮ, ಹಲ್ಲು ಕಚ್ಚಿ ದುಃಖಕ್ಕೆ ಆಣೆಕಟ್ಟನ್ನು ಕಟ್ಟಿದ್ದರು ಸತ್ಯನಾರಾಯಣರಾಯರು. ಇದ್ದ ಒಬ್ಬನೇ ಮಗ, ಪುಟ್ಟುತಮ್ಮ ಕಣ್ಣ ಮುಂದೇ ಇರಲಿ ಎಂಬ ಬಯಕೆ ಅದಮ್ಯವಾಗಿದ್ದರೂ, ಮಗನ ಶ್ರೇಯಸ್ಸಿಗೆ ಸಹಕಾರಿ ಈ ಅಗಲಿಕೆ ಎಂಬ ಜ್ಞಾನವೂ, ಮಹಾತ್ವಾಕಾಂಕ್ಷಿ ಮಗನ ಹಠವೂ ಸೇರಿ ಸತ್ಯನಾರಾಯಣರಾಯರ ಮತ್ತು ಅಲಮೇಲಮ್ಮನವರ ಬಾಯಿ ಕಟ್ಟಿಹೋಗಿತ್ತು. ರಾಯರು ಹೇಗೋ ಗಟ್ಟಿ ಮನಸ್ಸನ್ನು ಮಾಡಿ ತಡೆದುಕೊಂಡರಾದರೂ ಮೊದಲೇ ಕಾಯಿಲೆಗೆ ಬಿದ್ದಿದ್ದ ಅಲಮೇಲಮ್ಮನವರು ಇದೇ ಕೊರಗಿನಲ್ಲಿ ಸವೆಯುತ್ತಾ ಹೋದರು.

          ಮಗನಿಂದ ದೂರ ಇದ್ದ ಪ್ರತೀ ದಿನವೂ ಕೊರಗಿ ನವೆಯುತ್ತಿದ್ದ ತಂದೆತಾಯಿಗೆ ಪುಟ್ಟು ರಜೆಯಲ್ಲಿ ಮನೆಗೆ ಬಂದಾಗ ಹಬ್ಬ. ದಿನವೂ ತಪ್ಪದೇ ಪೂಜಿಸುತ್ತಿದ್ದ ಸಾಕ್ಷಾತ್ ದೇವರೇ ಅವತರಿಸಿದರೂ ಅಷ್ಟು ಸಂಭ್ರಮವಿರುತ್ತಿರಲಿಲ್ಲವೇನೋ ರಾಯರ ಮನೆಯಲ್ಲಿ. ಇದ್ದ ಒಬ್ಬನೇ ಮಗನಿಂದ ದೂರ ಇರಬೇಕಾದ ನೋವನ್ನಾದರೂ ಅಲಮೇಲಮ್ಮ ಸಹಿಸಿಕೊಂಡಿರುತ್ತಿದ್ದರೇನೋ, ಆದರೆ ಯಾವಾಗ ಮಗರಾಯ ಮನೆಯವರ ಇಚ್ಛೆಗೆ ವಿರುದ್ಧವಾಗಿ ತನ್ನ ಇಂಜಿನಿಯರಿಂಗಿನ ಸಹಪಾಠಿ ಜಾನು ಚಲವಾದಿಯನ್ನು ಮದುವೆಯಾಗುತ್ತೇನೆ ಎಂದು ಹೇಳಿದನೋ ಆಗ ಆ ತಾಯಿ ಹೃದಯ ಭಯಂಕರ ಆಘಾತವನ್ನು ಅನುಭವಿಸಿತ್ತು. ದಿನವಿಡೀ ದೇವರು ದಿಂಡಿರು ಎಂದು, ಮಡಿ ಮೈಲಿಗೆ ಎಂದು, ಅಸ್ಪ್ರಶ್ಯತೆಯನ್ನೂ ದೈವವಿದಿತ ನಿರ್ಬಂಧವೆಂದು ಯಥಾವತ್ತಾಗಿ ಪಾಲಿಸಿಕೊಂಡು ಬದುಕಿದ್ದ ಅಲಮೇಲಮ್ಮನವರಿಗೆಮಗ ಹರಿಜನ ಹುಡುಗಿಯೊಬ್ಬಳನ್ನು ಮದುವೆಯಾಗುವುದು ಜೀರ್ಣಿಸಿಕೊಳ್ಳಲಾಗಲೇ ಇಲ್ಲ. ಅದೇ ಹೃದಯಾಘಾತದಿಂದ ಅವರು ಅಸುನೀಗಿದ್ದರು. ಸತಿ, ಗೆಳತಿ, ಅರ್ಧಾಂಗಿ, ಆತ್ಮಬಂಧು ಎಲ್ಲ ಆಗಿದ್ದ ಹೆಂಡತಿಯನ್ನು ಕಳೆದುಕೊಂಡ ಮೇಲೆ ರಾಯರು ಬದುಕಿಯೂ ಸತ್ತಂತಾಗಿದ್ದರು. ಮಗನನ್ನು ತಾನು ಬದುಕಿರುವವರೆಗೂ ಕ್ಷಮಿಸಿರಲಿಲ್ಲ, ಕೊನೆಯವರೆಗೂ ಅವನನ್ನು ಮನದೊಳಕ್ಕೂ, ಮನೆಯೊಳಗೂ ಬಿಟ್ಟುಕೊಳ್ಳಲಿಲ್ಲ.

          ಸಂಪ್ರದಾಯವೆಂಬ ಹೆಸರಿನಲ್ಲಿ ಹಳೆಯ ಗೊಡ್ಡು ಮೂಢನಂಬಿಕೆಗಳೊಳಗೆ ಮುಳುಗಿದ್ದ ತಂದೆತಾಯಿಯನ್ನು ಜೀವಕ್ಕಿಂತ ಹೆಚ್ಚು ಪ್ರೀತಿಸಿದರೂ ಅವರ ವಿಚಾರಗಳು ಒಪ್ಪಿಕೆಯಾಗಿರಲಿಲ್ಲ ಪುಟ್ಟುವಿಗೆ. ಕಾಲ ಬದಲಾದಂತೆ ನಾವು ಬದಲಾಗಬೇಕು, ಜಾತಿ, ಧರ್ಮಗಳೆಂಬ ಭೇದಗಳನ್ನು ಮೀರಿ ನಿಲ್ಲಬೇಕು ಎಂದು ಎಷ್ಟು ವಾದ ಮಾಡಿದರೂ ಕಿವಿಗೇ ಹಾಕಿಕೊಳ್ಳದ ತಂದೆತಾಯಿಯರ ಬಗ್ಗೆ ಬೇಜಾರಿತ್ತು ಮಗನಿಗೆ. ಮೊದಲನೆಯದಾಗಿ ಇಂಜಿನಿಯರಿಂಗಿಗೋಸ್ಕರ ಮುಂಬೈಗೆ ಕಳಿಸಲೇ ಇಬ್ಬರಿಗೂ  ಇಷ್ಟವಿರದೇ ಇದ್ದುದು ಗುಟ್ಟೇನೂ ಅಗಿರಲಿಲ್ಲ. ಇಲ್ಲಿ ಕರ್ನಾಟಕದ ಯಾವುದೋ ಒಂದು ಇಂಜಿನಿಯರಿಂಗ್ ಕಾಲೇಜಿಗೆ ಹೋಗು ಎಂದು ಕೊನೆಯವರೆಗೂ ಒತ್ತಾಯಿಸಿದ್ದರು. ಆಗಲೂ ಸಾಕಷ್ಟು ವಾದವಿವಾದಗಳಾಗಿತ್ತು. ಯಾವುದೋ ಮಾತಿನ ಭರದಲ್ಲಿ ಪುಟ್ಟ "ನಿಮ್ಮ ಸರ್ಕಾರಿ ನೌಕರಿಗಳ ತಲೆಮಾರಿನವರಿಗೆ ಮಹಾತ್ವಾಕಾಂಕ್ಷೆಯೇ ಇಲ್ಲ, ಅಲ್ಪತೃಪ್ತರು ನೀವು. ನಿಮ್ಮಂತಹವರಿಂದಲೇ ನಮ್ಮ ದೇಶ ಇನ್ನೂ ಅಭಿವೃದ್ಧಿಶೀಲ ದೇಶವಾಗಿಯೇ ಉಳಿದಿರುವುದು" ಎಂದುಬಿಟಿದ್ದ. ಮುಂದೆ ಹಾಗೆ ಹೇಳಬಾರದಾಗಿತ್ತು ಎಂದು ಸಾವಿರ ಬಾರಿ ಎಂದುಕೊಂಡರೂ ಆಡಿದ ಮಾತು, ಕಳೆದುಕೊಂಡ ನಂಬಿಕೆ ಎರಡೂ ಹಿಂದಕ್ಕೆ ತಿರುಗಿ ಬರಲಿಲ್ಲ. ಅದಕ್ಕಿಂತ ದೊಡ್ಡ ಜಗಳ ಮದುವೆಯ ವಿಚಾರದಲ್ಲಿ ಆಗಿತ್ತು. ಗಾಂಧಿತತ್ವಗಳ ಬಗ್ಗೆ ಊರಿಡೀ ಭೋಧನೆ ಮಾಡುತ್ತಿದ್ದ ಅಪ್ಪ,ಅಣ್ಣಾವ್ರು ಕಾಮನಬಿಲ್ಲು ಚಿತ್ರದಲ್ಲಿ ಸರಿತಾಳನ್ನು ಅಂತರ್ಜಾತಿ ಮದುವೆಯಾಗುವಾಗ ಭಾವಪರವಶವಾಗುವ ಅಮ್ಮ, ಇಬ್ಬರೂ ತಮ್ಮ ಮನೆಯ ವಿಷಯಕ್ಕೆ ಬಂದಾಗ ಚೈತ್ರಳನ್ನು ಪೂರ್ವಾಗ್ರಹ ಪೀಡಿತವಾಗಿ ತಿರಸ್ಕರಿಸಿದಾಗ ಪುಟ್ಟನ ಆಶಾಸೌಧ ಕುಸಿದಿತ್ತುಚೈತ್ರಳ ಜಾತಿಯ ಆಧಾರದ ಮೇಲೆ ಅವಳನ್ನು ಸಂಸ್ಕಾರಹೀನಳು ಎಂದು ಅಮ್ಮ ಕರೆದಾಗ ಪುಟ್ಟನ ಮೈ ಕುದ್ದು ಹೋಗಿತ್ತು, ಕೈ ಎತ್ತುವುದೊಂದು ಬಾಕಿ ಇತ್ತು. ಅಷ್ಟರೊಳಗೆ ಮೊದಲೇ ಹೃದ್ರೋಗಿಯಾಗಿದ್ದ ಅಲಮೇಲಮ್ಮ ಹೃದಾಯಾಘಾತಕ್ಕೊಳಗಾಗಿ ಹಾಗೆಯೇ ಮೃತಪಟ್ಟಿದ್ದರಿಂದ ಪುಟ್ಟನ ಮನಸ್ಸಿನ ತುಂಬ, ಗೊತ್ತೇ ಇರದಂತೆ ಪಶ್ಚಾತ್ತಾಪ ಮಡುಗಟ್ಟಿತ್ತು. ಮೊಮ್ಮಗನ ಆಗಮನದ ನಂತರ ರಾಯರು ಸೊಸೆಯನ್ನು ಸ್ವೀಕರಿಸಿದರಾದರೂ ಮಗನೇ ಹೆಂಡತಿಯ ಸಾವಿಗೆ ಕಾರಣ ಎಂದು ನಂಬಿದ್ದ ಅವರು ಪುಟ್ಟನನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲಿಲ್ಲ. ತನ್ನ ಚಿತೆಗೆ ಮೊಮ್ಮಗನೇ ಅಗ್ನಿಸ್ಪರ್ಷ ಮಾಡಬೇಕು ಎಂದು ರಾಯರ ವಿಲ್ ಬೇರೆ ಮಾಡಿಬಿಟ್ಟಿದ್ದರು, ಎಂಬಲ್ಲಿಗೆ ಒಂದು ತಂದೆಮಗನ ಸಂಬಂಧ ಮುರಿದುಬಿದ್ದಿತ್ತು.

೨೦೧೧, ಬೆಂಗಳೂರು:
          ಧೋ ಎಂದು ಮಳೆಬಂದು ನಿಂತ ಮೇಲಿನ ಮೇಲಿನ ಮೌನ ಮನೆಮಾಡಿತ್ತು ವಿಶ್ವಮೂರ್ತಿಯವರ ಮನೆಯಲ್ಲಿ. ಹಿಂದಿನ ಆರು ತಿಂಗಳ ಕಾಲದಷ್ಟು ಸಮಯದಿಂದ ವಾದ ಮಾಡಿದರೂ ಒಪ್ಪದೇ, ವಿದೇಶಕ್ಕೆ ಹೊರಟುನಿಂತಿದ್ದ ಮಗನ ಎದುರು ಮತ್ತೆ ವಾದಕ್ಕೆ ನಿಲ್ಲುವುದು ಮೂರ್ಖತನ ಎಂದು ಗೊತ್ತಿದ್ದೂ ಜಗಳಕ್ಕೆ ನಿಂತಿದ್ದರು ಮೂರ್ತಿಗಳು ಮತ್ತು ಜಾನಕಮ್ಮ. ತಂದೆತಾಯಿಯರಿಗೆ ಗೊತ್ತೇ ಇಲ್ಲದಂತೆ GRE ಬರೆದುಕೊಂಡಿದ್ದಷ್ಟೇ ಅಲ್ಲದೇ, ಅಮೇರಿಕದ ಎರಡು ಬಹುಪ್ರತಿಷ್ಟಿತ ವಿಶ್ವವಿದ್ಯಾಲಯಗಳಿಂದ ಆಹ್ವಾನ ಬಂದಮೇಲಷ್ಟೇ ತಂದೆತಾಯಿಯರಿಗೆ ಹೇಳುವ ಉಡಾಫೆ ತೋರಿದ್ದ ಮಗ ಅನಿಕೇತ. ಇಂಜಿನಿಯರಿಂಗ್ ಮೂರನೇ ವರ್ಷದಲ್ಲಿರುವಾಗ ಒಮ್ಮೆ ವಿದೇಶಕ್ಕೆ ಹೋಗುವ ತನ್ನ ಇಚ್ಛೆಯನ್ನು ವ್ಯಕ್ತಪಡಿಸಿದ್ದ ಅನಿಕೇತ, ಆದರೆ ತಂದೆತಾಯಿಯರಿಬ್ಬರೂ ವಿರೋಧವನ್ನು ವ್ಯಕ್ತಪಡಿಸಿದ ಮೇಲೆ, ಪಕ್ಕದ ಮನೆಯ ಅರಿಹಂತನ ಮೇಲೆ ಆಸ್ಟ್ರೇಲಿಯದಲ್ಲಿ ಆದ ಜನಾಂಗೀಯ ಧಾಳಿಯ ಬಗ್ಗೆ ಉದಾಹರಿಸಿದ ಮೇಲೆ ಸ್ವಲ್ಪ ಸುಮ್ಮನಾಗಿದ್ದ. ಅಷ್ಟಾದ ಮೇಲೂ ಮತ್ತೂ ತನ್ನ ಹಠವನ್ನೇ ಸಾಧಿಸಿ ಅನಿಕೇತ GRE ಬರೆಯಲು ಪ್ರಯತ್ನಿಸಿದನೆಂಬ ವಿಷಯ, ಅದೂ ತನ್ನ ಬೆನ್ನಹಿಂದೆ ಹೀಗೆ ಮಾಡುತ್ತಾನೆಂಬ ಅನಿರೀಕ್ಷಿತ ಹೊಡೆತ ಮೂರ್ತಿಗಳನ್ನು ಹಣ್ಣು ಮಾಡಿತ್ತು. ಇನ್ನು ಮಗನಿಗೆ ಅತಿವಿರೋಧ ವ್ಯಕ್ತಪಡಿಸಿದರೆ ಹಗ್ಗ ಹರಿದೀತು ಎಂದು ಭಾವಿಸಿ ಒಲ್ಲದ ಮನಸ್ಸಿನಿಂದ್ದಲೇ ಮಗನ ವಿದೇಶೀ ಕನಸಿಗೆ ಅನುಮತಿ ಕೊಟ್ಟರು ಮೂರ್ತಿಗಳು.

          ಅನಿಕೇತ ಅಷ್ಟೆಲ್ಲಾ ಇಷ್ಟಪಟ್ಟು ವಿದೇಶಕ್ಕೆ ಕಲಿಯಲು ಹೋಗುತ್ತೇನೆ ಎಂದಾಗ ಬೇಡ ಎನ್ನಲು ಶಿಕ್ಷಣಪ್ರೇಮಿ ಎಂದು ಗುರುತಿಸಿಕೊಂಡಿದ್ದ, ಯಾವುದೋ ಗುರುತು ಪರಿಚಯ ಇಲ್ಲದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತಾ ಬಂದಿದ್ದ ಮೂರ್ತಿಗಳಿಗೆ ಇಷ್ಟ ಇರಲೇ ಇಲ್ಲವಾದರೂ ಒಬ್ಬ ತಂದೆಯಾಗಿ ಮಗನ ಬಗೆಗಿನ ಅತಿ ಕಕ್ಕುಲತೆಯೋ, ಅರಿಹಂತನ ಮೇಲಾಗಿದ್ದ ಮಾರಣಾಂತಿಕ ಹಲ್ಲೆಗಳಿಂದ ಮನಸ್ಸಿನ ಮೇಲೆ ಉಳಿದು ಹೋಗಿದ್ದ ಭಯದ ನೆರಳೋ, ಒಟ್ಟಾರೆಯಾಗಿ ಮೂರ್ತಿಗಳು ಖಡಾಖಂಡಿತವಾಗಿ ಮಗನ ವಿದೇಶೀ ಶಿಕ್ಷಣದ ಬಯಕೆಯನ್ನು ವಿರೋಧಿಸಿದ್ದರು. ಕೊನೆಗೂ ಎರಡೇ ವರ್ಷಗಳ ಮಟ್ಟಿಗೆ ಅಷ್ಟೇ ಅಲ್ಲವೇ ಎಂದುಕೊಂಡು ಒಪ್ಪಿದ್ದರು, ಅಲ್ಲಿ ಕೇವಲವಿದ್ಯಾಭ್ಯಾಸಕ್ಕೆ ಹೋಗುತ್ತಿರುವುದು ಎಂಬ ಪ್ರಮಾಣವನ್ನು ತೆಗೆದುಕೊಂಡ ಮೇಲೆ. MS ಮುಗಿದ ಮೇಲೆ ಯಾವಾಗ ಮಗರಾಯ ಸ್ವಲ್ಪವರ್ಷ ಅಲ್ಲಿಯೇ ಕೆಲಸಮಾಡಿ, ಅದರಿಂದ ಸಿಗುವ ಅನುಭವದ ಲಾಭದ ಬಗ್ಗೆ ಮಾತನಾಡತೊಡಗಿದನೋ ಆಗ ಮೂರ್ತಿಗಳಲ್ಲಿದ್ದ ನಿರಾಶಾವಾದಿ ಬೆಳೆಯುತ್ತ ಹೋದ, ಮಗ ಎಂದಿಗೂ ಹಿಂದಿರುಗಿ ಬರಲಾರ ಎನ್ನಿಸತೊಡಗಿತು. ಅಂತ್ಯಕಾಲದಲ್ಲಿ ಇರುವ ಒಬ್ಬ ಮಗನಿಂದ ದೂರವಿರುವಾ ಈ ಸಂಭ್ರಮಕ್ಕಾ ಅಷ್ಟೆಲ್ಲ ಪ್ರೀತಿಯಿಂದ ಮಗನನ್ನು ಬೆಳೆಸಿದ್ದು, ಇಂಜಿನಿಯರಿಂಗ್ ಕಲಿಸಿದ್ದು, ವಿದೇಶಕ್ಕೆ ಕಳಿಸಿ ಕಲಿಸಿದ್ದು ಎಂಬ ಪಶ್ಚಾತ್ತಾಪದ ಭಾವ ಮನಸ್ಸಲ್ಲಿ ಮನೆಮಾಡತೊಡಗಿತ್ತು. ಮತ್ತಾರು ತಿಂಗಳಿಗೆ ಜಾನಕಮ್ಮನವರಿಗೆ ಹೃದಯದ ಶಸ್ತ್ರಚಿಕಿತ್ಸೆ ಆದಾಗ, ಜೀವಕ್ಕಿಂತ ಹೆಚ್ಚಾಗಿ ಮಗನನ್ನು ಪ್ರೀತಿಸಿದ ತಾಯಿಯ ಸಾಯಲೂಬಹುದು ಎಂಬ ಸಂಶಯ ಇದ್ದರೂ ಏನೇನೋ ಕಾರಣ ಕೊಟ್ಟು ಮಗ ಬರದೇ ಇದ್ದಾಗ ಮತ್ತಷ್ಟು ಘಾಸಿಗೊಂಡಿತ್ತು ಮೂರ್ತಿಗಳ ಮನಸ್ಸು. ಇಷ್ಟೆಲ್ಲಾ ಸಾಲದು ಎಂದು ಅದೇ ಸಮಯದಲ್ಲಿ ಬಂದ ಗಾಳಿಸುದ್ದಿಯ ಪ್ರಕಾರ ಅನಿಕೇತ ಯಾರೊ ಒಬ್ಬ ಅಮೇರಿಕನ್ ಹುಡುಗಿಯ ಜೊತೆ ಲಿವ್-ಇನ್ ಇದ್ದನಂತೆ. ತನ್ನ ಮಗನ ಬಗ್ಗೆ ಯಾರಿಂದಲೋ ಕೇಳುವುದಾಯಿತಲ್ಲಾ ಎಂದು ಹಳಹಳಿಸುವುದೋ ಅಥವಾ ಭಾರತೀಯ ಸಂಸ್ಕ್ರತಿಯ ಬಗ್ಗೆ ಅಷ್ಟೆಲ್ಲಾ ಮಾತನಾಡುತ್ತಿದ್ದ ತನ್ನ ಮಗ ಒಬ್ಬ ಅಮೇರಿಕನ್ ಹುಡುಗಿಯ ಜೊತೆ ಅದೂ ಲಿವ್ ಇನ್ ಸಂಬಂಧದಲ್ಲಿ ಇದ್ದಾನಲ್ಲಾ ಎಂದು ಕೊರಗುವುದೋ ಎಂದು ತಿಳಿಯದಾಗಿತ್ತು ಮೂರ್ತಿಗಳಿಗೆ. ಆದರೂ ಯಾವುದೋ ಗಾಳಿಸುದ್ದಿಯನ್ನು ನಂಬಿ ಮಗನ ಬಗ್ಗೆ ಹೀಗೆ ಸಂದೇಹಿಸುವುದು ಸರಿಯಲ್ಲ ಎಂಬ ಭಾವನೆಯಿದ್ದಿದ್ದರಿಂದ ಮಗನನ್ನು ಕೇಳಲು ಹೋಗಿರಲಿಲ್ಲ ಮೂರ್ತಿಗಳು. ಎರಡು ತಿಂಗಳ ನಂತರ ಒಂದು ದಿನ ಮಗ ಕರೆಮಾಡಿದ್ದಾಗ ನಿಧಾನವಾಗಿ ವಿಷಯವನ್ನು ಎತ್ತಿದಾಗಲೂ ಮಗನ ಮನವೊಲಿಸಿ ಸರಿದಾರಿಗೆ ತರಬಹುದೆಂದು ಮೂರ್ತಿಗಳು ಶಾಂತವಾಗಿಯೇ ಇದ್ದರು, ಆದರೆ ಯಾವಾಗ ಮಗರಾಯ ಔಪಚಾರಿಕವಾಗಿಯೇನೋ ಎಂಬಂತೆ "ಮುಂದಿನ ತಿಂಗಳು ಮದುವೆಯಾಗುತ್ತಿದ್ದೇನೆ, ಬಂದುಬಿಡಿ, ಟಿಕೆಟ್ ಕಳಿಸುತ್ತೇನೆ" ಎಂದಾಗ ಮೂರ್ತಿಗಳಿಗೆ ಹೃದಯಾಘಾತವಾಗದೇ ಇದ್ದದ್ದು ದೊಡ್ಡದು. "ಇಲ್ಲಿಯವರೆಗಿನ ನಿನ್ನ ಎಲ್ಲ ತಪ್ಪುಗಳನ್ನು ಕ್ಷಮಿಸುತ್ತಾ, ನಿನ್ನ ಪರವಾಗಿ ನಿನ್ನ ಅಮ್ಮನಲ್ಲಿ ವಾದಿಸುತ್ತ ಬಂದ ನನಗೆ ನೀನು ನೀಡಿದ ಉಡುಗೊರೆಯೇ ಇದು ಅನಿಕೇತ? ಈ ವಿಷಯವನ್ನು ಜಾನಕಿಗೆ ಹೇಳಬೇಡ ಯಾವುದೇ ಕಾರಣಕ್ಕೂ. ಹಾರ್ಟ್ ಆಪರೇಶನ್ ಆದ ಮೇಲೆ ಯಾವುದೇ ಆಘಾತಕಾರಿ ಸುದ್ದಿ ಹೇಳಬಾರದು ಎಂದು ವೈದ್ಯರು ಹೇಳಿದ್ದಾರೆ. ಇನ್ನು ನನ್ನ ಜೀವನದ ಏಕೈಕ ಆಧಾರ ಅವಳು, ಅವಳನ್ನು ನಿನ್ನಿಂದಾಗಿ ಕಳೆದುಕೊಳ್ಳಲು ಇಷ್ಟವಿಲ್ಲ ನನಗೆ. ಅವಳಾಗಿಯೇ ಕೇಳಿದರೆ ಏನಾದರೂ ಕಾರಣವನ್ನು ಹೇಳಿ ಮದುವೆಯ ವಿಷಯವನ್ನು ಮುಂದೂಡು. ದಯವಿಟ್ಟು ಅಷ್ಟನ್ನು ಮಾಡು. please. " ಎಂದು ಹೇಳಿ ಫೋನನ್ನು ಕುಕ್ಕಿದ ವಿಶ್ವಮೂರ್ತಿ ರಾಯರಿಗೆ ಪುಟ್ಟನಾಗಿ ತಾನು ಮಾಡಿದ್ದು ತಪ್ಪೇ? ಎಂದು ಮೊದಲ ಬಾರಿಗೆ ಅನ್ನಿಸಿತು.

   
ಅಡಿ ಟಿಪ್ಪಣಿ:
     *  ನಮ್ಮ ಜೀವನವೇ ಹಾಗೆ ಅಲ್ಲವೇಜೀವನಪೂರ್ತಿ ನಾವು ಬದುಕುವುದೇ ಹಾಗೆನಮಗೆ ಯಾವುದು ಸರಿಯಾಗಿ ಕಾಣುತ್ತದೆಯೋ ಅದನ್ನೇ ನಾವು ಮಾಡುತ್ತೇವೆನಮಗೆ ಸರಿಯಾಗಿ ಕಂಡ ನಿರ್ಧಾರ ನಮ್ಮೆದುರಲ್ಲಿರುವವರಿಗೆ ಸಹ ಸರಿಯಾಗಿ ಕಾಣಬೇಕೆಂದೇನಿಲ್ಲಅಷ್ಟೇ ಅಲ್ಲಸ್ವಲ್ಪ ಸಮಯದ ನಂತರ ನಮ್ಮ ನಿರ್ಧಾರ ನಮಗೇ ಸರಿಯಾಗಿ ಕಾಣದೇ ಹೋಗಬಹುದುಇಬ್ಬರ ನಡುವಿನ ಒಂದು ವಾದದಲ್ಲಿಯೇ ಆಗಲೀಜೀವನದ ಅತಿಮುಖ್ಯ ನಿರ್ಧಾರಗಳಲ್ಲಿಯೇ ಆಗಲೀಇನ್ನೊಬ್ಬರ ಬಗೆಗಿನ ಸರಿತಪ್ಪುಗಳ ನಿರ್ಣಯದಲ್ಲಿಯೇ ಆಗಲೀಒಂದೇ ಸರಿ ಮತ್ತು ಒಂದೇ ತಪ್ಪು ಇರಲು ಸಾಧ್ಯವಿಲ್ಲನಮಗೆ ಸರಿಯಾಗಿ ಕಂಡಿದ್ದು ಬೇರೆಯವರಿಗೆ ತಪ್ಪಾಗಿ ಕಾಣಬಹುದುಎಲ್ಲರ ದೃಷ್ಟಿಕೋನದಿಂದ ನೋಡಲು ಬಂದ ಹೊರತು ನಾವು ಅಂದುಕೊಳ್ಳುವ ಯಾವುದೇ ಸರಿಯೂ ಒಂದು 'absolute' ಸರಿ ಅಲ್ಲಏನೇ ಇರಲಿ ಈ ಟಿಪ್ಪಣಿಯ ಬಗ್ಗೆಯಾಗಲೀಆ ತಲೆಬರಹದ ಬಗೆಗಾಗಲೀಹೆಚ್ಚು ತಲೆ ಕೆಡಿಸಿಕೊಳ್ಳದೇ ಸುಮ್ಮನೇ ಓದಿಕೊಳ್ಳಿಒಂದು ಕಿರುಕಥೆ ಮಾತ್ರ ಎಂದುಕೊಂಡು.
       
   *ಈ ಕಥೆ  ಹಿಂದಿನ ವಾರದ (೩/೬/೧೩ರ) ಪಂಜು ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು .  ಅಲ್ಲಿ ಓದಿದವರಿಗೆ ಪುನರಾವರ್ತನೆ ಆದರೆ ಕ್ಷಮೆ ಇರಲಿ .